0 Shares

ನವದೆಹಲಿ : ರಾಜ್ಯಸಭಾ ಸದಸ್ಯರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 10 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಅವರು ಪಾಟ್ನಾದಿಂದ ದೆಹಲಿಗೆ ತೆರಳಲಿದ್ದಾರೆ.

ಎರಡು ಮೂರು ದಿನಗಳ ಕಾಲ ರಾಜಧಾನಿಯಲ್ಲಿ ಉಳಿಯಲಿದ್ದು, ಈ ಸಂದರ್ಭದಲ್ಲಿ ಅವರು ಹಿರಿಯ ಬಿಜೆಪಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಏಪ್ರಿಲ್ 13ರ ವೇಳೆಗೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ ಪಾಟ್ನಾಗೆ ಹಿಂದಿರುಗಿದ ಬಳಿಕ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೀಗಾಗಿ ಶೀಘ್ರದಲ್ಲೇ ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆಯಲಿದೆ.

ಜೆಡಿ (ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರ ಬಳಿಕ ಬಿಹಾರದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲಗಳು ಹೆಚ್ಚಾಗಿದೆ. ಕೆಲವು ತಿಂಗಳ ಹಿಂದೆಯಷ್ಟೇ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಸಂವಿಧಾನದ ನಿಬಂಧನೆಗಳ ಪ್ರಕಾರ ಶಾಸಕರಲ್ಲದ ವ್ಯಕ್ತಿ ಆರು ತಿಂಗಳವರೆಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶವಿದೆ. ಇದಕ್ಕಾಗಿ ನಿತೀಶ್ ಕುಮಾರ್ ಸಹಾಯಕರು ಸೂಚಿಸಬಹುದು. ಇಲ್ಲವಾದರೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ ಬಳಿಕ ಹೊಸ ಮುಖ್ಯಮಂತ್ರಿಯ ಆಯ್ಕೆ ನಡೆಯುವ ಸಾಧ್ಯತೆ ಇದೆ. ಸುಮಾರು ಎರಡು ದಶಕಗಳಿಂದ ಬಿಹಾರದ ಆಡಳಿತ ಒಕ್ಕೂಟದ ಭಾಗವಾಗಿರುವ ಬಿಜೆಪಿ ಈ ಬಾರಿ ಮುಖ್ಯಮಂತ್ರಿ ಅಧಿಕಾರ ಕೇಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೆಸರು ಕೇಳಿ ಬರುತ್ತಿದ್ದು, ಅವರ ಬಳಿಕ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಕೂಡ ಮುಖ್ಯಮಂತ್ರಿ ರೇಸಿನಲ್ಲಿದ್ದರೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಈ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ಮಾಧ್ಯಮವೊಂದಕ್ಕೆ ತಿಳಿಸಿವೆ.

ಹೊಸ ಸಂಪುಟದಲ್ಲಿ ಹೆಚ್ಚಿನ ಪಾಲು ಪಡೆಯಲು ಜೆಡಿ (ಯು) ಪ್ರಯತ್ನಿಸಲಿದ್ದು, ಈ ನಿಟ್ಟಿನಲ್ಲಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್‌ಗೆ ಪ್ರಮುಖ ಸ್ಥಾನಮಾನ ದೊರಕಿಸಿಕೊಡುವ ಬಗ್ಗೆಯೂ ಪಕ್ಷದ ಒಳಗೆ ಚರ್ಚೆಗಳು ನಡೆಯುತ್ತಿವೆ.

ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರೂ ಅವರಿಗೆ ನೀಡಲಾಗಿರುವ ‘ಝಡ್ ಪ್ಲಸ್’ ಭದ್ರತೆ ಮುಂದುವರಿಯಲಿದೆ. ರಾಜ್ಯಸಭಾ ಸದಸ್ಯರಾಗಿ ಅಧಿಕಾರ ವಹಿಸಿಕೊಂಡ ಬಳಿಕವೂ ಅವರಿಗೆ ಇದೇ ರೀತಿಯ ಭದ್ರತೆಯನ್ನು ಒದಗಿಸಲಾಗುತ್ತದೆ. ಬಿಹಾರ ವಿಶೇಷ ಭದ್ರತಾ ಕಾಯ್ದೆ 2000ರ ಅಡಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

0 Shares

By admin

Leave a Reply

Your email address will not be published. Required fields are marked *