ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ಪ್ರಧಾನಿ ನರೇಂದ್ರ ಮೋದಿ ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಗ್ಯಾರಂಟಿ ನೀಡಿದ್ದಾರೆ.
“ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ ನೀಡುತ್ತೇನೆ” ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪರಿಚಯಿಸಲಾದ ಮೂರು ಮಸೂದೆಗಳ ಕುರಿತು ಚರ್ಚೆ ನಡೆಸಲು ವಿಶೇಷ ಸಂಸತ್ತಿನ ಅಧಿವೇಶನವು ಇಂದು ಪ್ರಾರಂಭವಾಯಿತು.
ಈ ಅಧಿವೇಶನವು ಎನ್ಡಿಎ ಮತ್ತು ವಿರೋಧ ಪಕ್ಷದ ನಡುವೆ 40 ನಿಮಿಷಗಳ ಕಾಲ ನಡೆದ ಬಿಸಿ ಬಿಸಿ ಚರ್ಚೆಯೊಂದಿಗೆ ಪ್ರಾರಂಭವಾಯಿತು. ನಂತರ ಎನ್ಡಿಎ ಮತ್ತು ವಿರೋಧ ಪಕ್ಷದವರು ಸಾಂವಿಧಾನಿಕ (131 ನೇ ತಿದ್ದುಪಡಿ) ಮಸೂದೆಯನ್ನು ಪರಿಚಯಿಸುವ ಮೊದಲು ಮತಗಳ ವಿಭಜನೆಗೆ ಒತ್ತಾಯಿಸಿದರು. ಕೊನೆಗೆ ಈ ಮಸೂದೆಯನ್ನು 251 ಸದಸ್ಯರು ಬೆಂಬಲಿಸಿದರು ಮತ್ತು 185 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು.
ದಕ್ಷಿಣ ಭಾರತದ ಮುಖ್ಯಮಂತ್ರಿಗಳಾದ ತಮಿಳುನಾಡಿನ ಎಂ.ಕೆ. ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್, ತೆಲಂಗಾಣದ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಸಿದ್ದರಾಮಯ್ಯ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ತಮ್ಮ ರಾಜ್ಯಗಳಿಗೆ ಈ ಸೀಮಾ ನಿರ್ಣಯದಿಂದ ಅನ್ಯಾಯವಾಗುತ್ತದೆ. ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಪ್ರಕ್ರಿಯೆಯನ್ನು ವಿರೋಧಿಸುವ ಧ್ವನಿಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೆ ಮಾಡುತ್ತಿವೆ. ಇದರಿಂದ ಯಾವ ರಾಜ್ಯಕ್ಕೂ ಯಾವುದೇ ತಾರತಮ್ಯ, ಅನ್ಯಾಯ ಆಗುವುದಿಲ್ಲ ಎಂಬುದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.
