0 Shares

ಕೋಲಾರ : ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿತ್ತು. ಈ ಮೂಲಕ ಮನಸ್ಥೈರ್ಯ ಇದ್ದರೆ ಯಾವುದೂ ಅಸಾಧ್ಯವಲ್ಲವೆಂದು ಬಾಲಕಿ ತೋರಿಸಿಕೊಟ್ಟಿದ್ದಳು. ಉಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಳು. ಆದರೆ ಈಗ ಅದೇ ಬಾಲಕಿಯ ಚಿಕಿತ್ಸೆಗೆ ಆಕೆಯ ತಂದೆ ಹರಸಾಹಸ ಪಡುತ್ತಿರುವುದನ್ನು ತಿಳಿದ ಮಾಜಿ ಸಚಿವ ಸುರೇಶ್ ಕುಮಾರ್, ಬಾಲಕಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.

ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ 16 ವರ್ಷದ ಕುಸುಮಾ, ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಳು. ನಂತರ ಆಕೆಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿತ್ತು.ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದ ಕುಸುಮಾ, ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಳು.

ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಮಲಗಿಕೊಂಡೇ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದರು.

ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ವೈಟ್‌ಫೀಲ್ಡ್‌ನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಅಗತ್ಯವಿದ್ದ ಹಣದ ಕೊರತೆಯಿಂದ ತಂದೆ ಶಂಕರಪ್ಪ ಸಂಕಷ್ಟಕ್ಕೀಡಾಗಿ, ತನ್ನ ಕಿಡ್ನಿ ಮಾರಾಟ ಮಾಡುವ ನಿರ್ಧಾರಕ್ಕೂ ಬಂದಿದ್ದರು. ವಿಷಯ ತಿಳಿದು ಮಾಜಿ ಸಚಿವ ಸುರೇಶ್ ಕುಮಾರ್ ತಕ್ಷಣ ಸ್ಪಂದಿಸಿ ನೆರವಿಗೆ ಬಂದಿದ್ದಾರೆ.

ಅವರು ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಮಾಹಿತಿ ನೀಡಿ, ಮುಖ್ಯಮಂತ್ರಿ ನಿಧಿಯಿಂದ ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆ ಮಾಡಲು ಮುಂದಾಗಿದ್ದು, ಈ ಭರವಸೆಯಿಂದ ಕುಟುಂಬಕ್ಕೆ ಜೀವ ಬಂದಂತಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಿಷಯ ಹಂಚಿಕೊಂಡ ಸುರೇಶ್ ಕುಮಾರ್ ಅವರ ಮಾನವೀಯ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

0 Shares

By admin

Leave a Reply

Your email address will not be published. Required fields are marked *